ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶದ ಆರನೇ ಕರಡು ಅಧಿಸೂಚನೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯಗಳ ಅಹವಾಲು ಆಲಿಸಿ ಮನವೊಲಿಸಲು ಕೇಂದ್ರ ಸರ್ಕಾರ ಕಸರತ್ತು ನಡೆಸಿದೆ. ಕರಡುಗೆ ವಿರೋಧ ವ್ಯಕ್ತಪಡಿಸಿರುವ ರಾಜ್ಯಗಳ ಸಲಹೆಗಳನ್ನು ಸಮಗ್ರವಾಗಿ ಪರಿಶೀಲಿಸಿ ಮನವೊಲಿಸಲು ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ಸಮಿತಿಯನ್ನು ರಚಿಸಿದೆ.
ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಪ್ರದೇಶದ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ ಸಚಿವಾಲಯ ಜುಲೈ 31ರಂದು ಕರಡು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಗೆ ಕರ್ನಾಟಕ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಹಾಗೂ ಕರಡು ಅಧಿಸೂಚನೆಯನ್ನು ತಿರಸ್ಕರಿಸಿತ್ತು.
‘ಕಸ್ತೂರಿರಂಗನ್ ವರದಿಯು ರಾಜ್ಯದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿದರೆ 10 ಜಿಲ್ಲೆಗಳ 33 ತಾಲ್ಲೂಕುಗಳ 1,499 ಗ್ರಾಮಗಳಲ್ಲಿ ನೂರಾರು ವರ್ಷಗಳಿಂದ ವಾಸಿಸುವ ಲಕ್ಷಾಂತರ ಜನರ ಕುಟುಂಬಗಳಿಗೆ ಕಂಟಕ ಎದುರಾಗಲಿದೆಯಾದ್ದರಿಂದ ಈ ವರದಿಯ ಬಗ್ಗೆ ಜನರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳು ಕೂಡ ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. ಇದಲ್ಲದೆ, ಈ ವರದಿಯಲ್ಲಿ ಗುರುತಿಸಿರುವ ಬಹುತೇಕ ಪ್ರದೇಶವನ್ನು ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಈಗಾಗಲೇ ಸಂರಕ್ಷಣೆ ಮಾಡಲಾಗುತ್ತಿದೆ’ ಎಂದು ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಪತ್ರ ಬರೆದು ತನ್ನ ನಿಲುವನ್ನು ತಿಳಿಸಿತ್ತು. 12 ಜಿಲ್ಲೆಗಳ 98 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ತರಲು ಕೇರಳ ಸರ್ಕಾರ ನವೆಂಬರ್ 2ರಂದು ಸಮ್ಮತಿ ಸೂಚಿಸಿತ್ತು. ಉಳಿದ ನಾಲ್ಕು ರಾಜ್ಯಗಳು ಕರಡು ಅಧಿಸೂಚನೆಯನ್ನು ವಿರೋಧಿಸಿದ್ದವು.
ಪಶ್ಚಿಮ ಘಟ್ಟದ ಅಪರೂಪದ ಜೀವ ವೈವಿಧ್ಯದ ಸಂರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಹಿರಿಯ ವಿಜ್ಞಾನಿ ಮಾಧವ ಗಾಡ್ಗೀಳ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಹಿಂದೆ ಸಮಿತಿ ರಚಿಸಿತ್ತು. ಈ ಸಮಿತಿಯು 2011ರಲ್ಲಿ ಪಶ್ಚಿಮಘಟ್ಟದ 1,29,037 ಚದರ ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬಹುದೆಂದು ಶಿಫಾರಸು ಮಾಡಿತ್ತು. ಅಲ್ಲದೇ ಪಶ್ಚಿಮಘಟ್ಟದ ಶೇ 64ರಷ್ಟು ಪ್ರದೇಶದಲ್ಲಿ ಅಭಿವೃದ್ಧಿಗೆ ಕೆಲವು ನಿರ್ಬಂಧವನ್ನು ಹೇರಬೇಕೆಂದು ಶಿಫಾರಸು ಮಾಡಿತ್ತು. ಇದಕ್ಕೆ ರಾಜಕೀಯ ವಲಯದಲ್ಲಿ ಭಾರಿ ವಿರೋಧ ಎದುರಾದಾಗ ಕೇಂದ್ರ ಸರ್ಕಾರ ಗಾಡ್ಗೀಳ್ ವರದಿ ಪರಿಶೀಲನೆಗೆ 2013ರ ಏಪ್ರಿಲ್ 15ರಂದು ಡಾ.ಕೆ.ಕಸ್ತೂರಿ ರಂಗನ್ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಅದೇ ವರ್ಷದ ನವೆಂಬರ್ 13ರಂದು ವರದಿ ನೀಡಿ, ಪಶ್ಚಿಮಘಟ್ಟದ ಶೇ 37ರಷ್ಟು ಅರಣ್ಯ ಪ್ರದೇಶವನ್ನು ಅಂದರೆ 59,940 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತು ಮಾಡಿತು.
ಅದರ ಪ್ರಮುಖ ನಿರ್ಣಯಗಳು ಹೀಗಿವೆ..
- ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಅಡ್ಡಿ ಮಾಡಬಾರದು. ಪ್ರತಿ ಗ್ರಾಮದಲ್ಲೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು.
- ಪಡಿತರ ಚೀಟಿ ಹೊಂದಿಲ್ಲದ ಬುಡಕಟ್ಟು ಕುಟುಂಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್ ಪಡಿತರ ಚೀಟಿ ಒದಗಿಸಿ ವರದಿಯನ್ನು ಸಲ್ಲಿಸಬೇಕು.
- ಅರಣ್ಯ ಹಕ್ಕು ಸಮಿತಿಗಳ ಮುಂದೆ ಬಾಕಿ ಇರುವ ಅರ್ಜಿಗಳನ್ನು ನಿಗದಿತ ಅವಧಿಯ ಒಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು
- ಆರೋಗ್ಯ ಇಲಾಖೆಯಲ್ಲಿ ಬುಡಕಟ್ಟು ಜನರನ್ನು ಸ್ಥಳೀಯವಾಗಿ ನೇಮಕ ಮಾಡುವ ಬಗ್ಗೆ ಪರಿಶೀಲನೆ ನಡೆಸಬೇಕು. ಹಳ್ಳಿಗಳಲ್ಲಿ ಸ್ಮಶಾನ ಭೂಮಿ ಒದಗಿಸಬೇಕು..
- ಬುಡಕಟ್ಟು ಸಮುದಾಯಕ್ಕೆ ಅಗತ್ಯ ಸೌಲಭ್ಯಗಳನ್ನು ನೀಡುವ ವಿಷಯದಲ್ಲಿ ಕಂದಾಯ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು
- ವೇಶನ ರಹಿತರು ಒಪ್ಪಿಗೆ ಸೂಚಿಸಿದರೆ ಅವರಿಗೆ ಬೇರೆ ಕಡೆ ನಿವೇಶನ ಒದಗಿಸಿ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಅರಣ್ಯದ ಅಂಚಿನಲ್ಲಿ ಜಮೀನುಗಳನ್ನು ಗುರುತಿಸಬೇಕು. ನಿವೇಶನ ಇದ್ದರೂ ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಮನೆ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕು
- ಬುಡಕಟ್ಟು ಜನರಿಗೆ ಹಕ್ಕುಪತ್ರ ವಿತರಣೆಗೆ ಇರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ತೆಗೆದುಕೊಳ್ಳಬೇಕು. ಹಕ್ಕು ಪತ್ರ ಹೊಂದಿರುವವರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅರ್ಹತೆ ಪಡೆಯುವ ಕುರಿತು ಕ್ರಮ ಕೈಗೊಳ್ಳಬೇಕು
ಎಂಬಿತ್ಯಾದಿ..
Leave a reply